ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಕಾನೂನು ಹೋರಾಟಕ್ಕೆ ಸಿದ್ದವಾಗಿದ್ದು ಮುಡಾ ತನಿಖೆಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಮುಡಾ ಹಗರಣದ ತೀರ್ಪನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಮುಡಾ ಹಗರಣದಲ್ಲಿ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಅನುಮತಿ ನೀಡಿದ ಬೆನ್ನಲ್ಲೇ ಇಡಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಈ ವಿಚಾರವಾಗಿ ಸೆಪ್ಟೆಂಬರ್ 24ರ ಆದೇಶ ಪ್ರಶ್ನಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದು ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್ನಲ್ಲಿ ಆರಂಭವಾಗಿದೆ. ಆಗಸ್ಟ್ 19ರಂದು ಅರ್ಜಿ ವಿಚಾರಣೆ ನಡೆಸಿದ್ದ ಕೋರ್ಟ್, ಆಗಸ್ಟ್ 29ರ ತನಕ ಯಾವುದೇ ಕ್ರಮ ತೆಗೆದುಕೊಳ್ಳಬಾರದು ಎಂದು ಅಧೀನ ನ್ಯಾಯಾಲಯಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಅರ್ಜಿ ಸಲ್ಲಿಸಿದರು. ಗುರುವಾರ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಅರ್ಜಿಯ ವಿಚಾರಣೆ ನಡೆಯಿತು. ಸಿದ್ದರಾಮಯ್ಯ ಪರವಾಗಿ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡನೆ ಮಾಡಿದರು. ಕರ್ನಾಟಕ ರಾಜ್ಯಪಾಲರ ಕಾರ್ಯದರ್ಶಿ ಪರವಾಗಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.
ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿ ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಅವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಆದರೆ ಸೆಕ್ಷನ್ 17-ಎ ಅನ್ವಯವಾಗುವುದಿಲ್ಲ. ಇದರ ಆಧಾರದ ಮೇಲೆ ಅನುಮತಿ ನೀಡಿರುವುದನ್ನು ರದ್ದುಗೊಳಿಸಬೇಕೆಂದು ಮನವಿ ಮಾಡಿದರು.
ಇತ್ತ ಮಹಾರಾಷ್ಟ್ರ, ಜಾರ್ಖಂಡ್ನಲ್ಲಿ ನಡೆಯುವ ಚುನಾವಣೆ ಹಾಗೂ ವಿವಿಧ ಉಪ ಚುನಾವಣೆಗಳ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೆರಳದಂತೆ ಬಿಜೆಪಿ, ಜೆಡಿಎಸ್ ಪಿತೂರಿ ನಡೆಸಿದ್ದು, ಜಾರಿ ನಿರ್ದೇಶನಾಲಯದ ಮೂಲಕ ನವೆಂಬರ್ 7-8 ರಂದು ಸಮನ್ಸ್ ನೀಡಲು ಸಿದ್ಧತೆ ನಡೆಸಿವೆ ಎನ್ನುವ ಆರೋಪಗಳು ಕೂಡ ಕೇಳಿ ಬಂದಿದೆ. ಈ ಬಗ್ಗೆ ಕೆಪಿಸಿಸಿ ನಗರ ವಕ್ತಾರ ಎಂ. ಲಕ್ಷ್ಮಣ ಮಾತನಾಡಿ, ‘ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಲೋಕಾಯುಕ್ತ ತನಿಖೆ ಮಾಡುತ್ತಿರುವಾಗ, ಇ.ಡಿ ಪರ್ಯಾಯ ತನಿಖೆ ಮಾಡುವುದು ಕಾನೂನು ಸಮ್ಮತವೇ? ಮಿಲಿಟರಿ ಪಡೆಗಳ ರೀತಿ ಒಳನುಗ್ಗಿ, ಗನ್ ಪಾಯಿಂಟ್ನಲ್ಲಿ ಸಿಬ್ಬಂದಿಯನ್ನು ಬೆದರಿಸಿ, ರಾತ್ರೋರಾತ್ರಿ ಕಡತಗಳನ್ನು ಹೊತ್ತೊಯ್ದಿದ್ದಾರೆ. ಈ ಅಕ್ರಮ ತನಿಖಾ ನಡೆಯನ್ನು ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.


Add comment